ಉಡುಪಿ ಮಿತ್ರ ಪತ್ರಿಕೆ ಸುದ್ಧಿ :
ಕುಂದಾಪುರ, ಮೇ೨: ವಿದ್ಯಾರ್ಥಿಗಳಿಗೆ ಜ್ಞಾನ, ಶಿಸ್ತು ಹಾಗೂ ಸಂಸ್ಕಾರ ಧಾರೆ ಎರೆದಾಗ ವಿದ್ಯಾರ್ಥಿಗಳು ಪರಿಪೂರ್ಣ ಮಾನವರಾಗಿ ರೂಪುಗೊಳ್ಳಲು ಸಾಧ್ಯ ಎಂದು ಮಾಜಿ ಸಚಿವ ಶ್ರೀ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.

ಅವರು ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿಯಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಆಯೋಜಿಸಿದ್ದ ಏಳು ದಿನಗಳ ಮಂಥನ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಬೂಟ್ ಕ್ಯಾಂಪ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸುಜ್ಞಾನ ಶಿಕ್ಷಣ ಸಂಸ್ಥೆಯು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಇಂತಹ ಉತ್ತಮ ಶಿಬಿರಗಳನ್ನು ಆಯೋಜಿಸುತ್ತಿರುವುದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಶ್ಲಾಘನೀಯ. ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಆ ವೃತ್ತಿ ಕೇವಲ ಉದ್ಯೋಗವಲ್ಲ, ಅದೊಂದು ಸೇವೆಯ ಭಾವ. ಅವರು ಅಧ್ಯಯನಶೀಲರಾಗಿ ಜ್ಞಾನವನ್ನು ಗಳಿಸಿ ವಿದ್ಯಾರ್ಥಿಗಳಿಗೆ ದಾನ ಮಾಡಬೇಕು. ಬದಲಾಗುತ್ತಿರುವ ಶಿಕ್ಷಣ ಕ್ರಮಕ್ಕೆ ತಕ್ಕಂತೆ ಶಿಕ್ಷಕರು ಅಪ್ಡೇಟ್ ಆಗಬೇಕು ಎಂದು ಕರೆ ನೀಡಿದರು.

ಯೋಗ ಮತ್ತು ಏಕಾಗ್ರತೆ ಸಾಧಿಸಬೇಕು- ವಿದ್ಯಾರ್ಥಿಗಳಿಗೆ ಕಿವಿಮಾತು:
ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು ಯೋಗಾಭ್ಯಾಸ ಮಾಡಬೇಕು. ಯೋಗಾಭ್ಯಾಸವು ಮೆದುಳನ್ನು ಚುರುಕುಗೊಳಿಸಿ ನೆನಪಿನ ಶಕಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಗಣಿತದಂತಹ ಕಠಿಣ ವಿಷಯಗಳನ್ನೂ ಸುಲಭವಾಗಿ ಅರ್ಥಮಾಡಿಕೊಳ್ಳಲು ಯೋಗ ಸಹಕಾರಿ. ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ನಿರ್ದೇಶಕರು ಹಾಗೂ ಸಹಕಾರಿ ಧುರೀಣರಾದ ಚಂದ್ರಶೇಖರ್ ಶೆಟ್ಟಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಪೇಪರ್ ಆರ್ಟ್ ಸ್ಪೆಷಲಿಸ್ಟ್ ಎಸ್.ಎಫ್. ಹುಸೇನಿ, ಹಿನ್ನೆಲೆ ಗಾಯಕ ಶ್ರೀ ಹರ್ಷ ಹಾಗೂ ಸುಜ್ಞಾನ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕಿ ಸುದಕ್ಷಿಣಾ ಆರ್. ಉಡುಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



