ಉಡುಪಿ ಮಿತ್ರ ಪತ್ರಿಕೆ ಸುದ್ಧಿ:
ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಉಡುಪಿ ,ಎ,7: ಉಡುಪಿ ಮಂಚಿ, ಕಟ್ಟಾಡಿ ಪ್ರದೇಶದಲ್ಲಿ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ವತಿಯಿಂದ ನಿರ್ಮಿಸಲಾದ ಸಮುದಾಯ ಭವನ ಉದ್ಘಾಟನಾ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಗಳು, “ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು ಸಮಾಜದ ಆಸ್ತಿಯಾಗುತ್ತಾರೆ. ಆ ದಿಕ್ಕಿನಲ್ಲಿ ನಮ್ಮ ಮಕ್ಕಳನ್ನು ಬೆಳೆಸಬೇಕು” ಎಂದು ಹೇಳಿದರು.
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು ಉದಾಹರಿಸಿದ ಅವರು, “ತಮ್ಮ ಪ್ರಯೋಜನಕ್ಕಾಗಿ ಅಲ್ಲದೆ ಸಮಾಜದ ಹಿತಕ್ಕಾಗಿ ಬದುಕಿದವರ ಹೆಸರು ಶಾಶ್ವತವಾಗಿರುತ್ತದೆ” ಎಂದು ತಿಳಿಸಿದರು.

ಹಾಸನ ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಪೀಠದ ಜಗದ್ಗುರು ಅನಂತ ವಿಭೂಷಿತ ಶಿವ ಸುಜ್ಞಾನ ತೀರ್ಥ ಮಹಾಸ್ವಾಮೀಜಿಗಳು ಆಶೀರ್ವಚನ ನೀಡಿ, “ಸಮಾಜದಲ್ಲಿ ಹೊಸ ಪೀಳಿಗೆಗೆ ಉತ್ತಮ ಸಂಸ್ಕಾರ ಸಿಗುವಂತಾಗಬೇಕು. ಧಾರ್ಮಿಕ ಮೌಲ್ಯಗಳ ಆಧಾರದ ಮೇಲೆ ಸಮಾಜ ಅಭಿವೃದ್ಧಿಯಾಗಬೇಕು” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶೇಖರ ಆಚಾರ್ಯ ವಹಿಸಿದ್ದರು.
ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮುಲ್ಕಿ ಮಾತನಾಡಿ, “ಸಂಘ-ಸಂಸ್ಥೆಗಳಲ್ಲಿ ದುಡಿದವರನ್ನು ಮರೆತುಬಿಡುವ ಪ್ರವೃತ್ತಿ ಸರಿಯಲ್ಲ” ಎಂದು ಅಭಿಪ್ರಾಯಪಟ್ಟರು.
ಯೋಜನಾ ನಿರ್ದೇಶಕ ವಿಜಯಕುಮಾರ್ ಮಾತನಾಡಿ, “ಇತರರ ಒಳಿತನ್ನು ಬಯಸುವವರ ಜೀವನದಲ್ಲಿ ಸದಾ ಸಕಾರಾತ್ಮಕ ಶಕ್ತಿ ಇರುತ್ತದೆ” ಎಂದರು.
ಉದ್ಘಾಟನಾ ಸಮಾರಂಭದಲ್ಲಿ ಶ್ರೀಧರ ಆಚಾರ್ಯ ವಡೇರು ಹೋಬಳಿ, ಬಿಲ್ಡರ್ ಭವಾನಿ ನಾರಾಯಣ ಆಚಾರ್ಯ, ಯೋಗೀಶ್ ಆಚಾರ್ಯ, ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಮುರಹರಿ ಆಚಾರ್ಯ, ಧನಂಜಯ ಆಚಾರ್ಯ, ಡಾ. ಎಸ್.ಆರ್. ಹರೀಶ್ ಆಚಾರ್ಯ ಸೇರಿದಂತೆ ಹಲವರು ಮಾತನಾಡಿದರು.

ವೇದಿಕೆಯಲ್ಲಿ ರಾಮಕೃಷ್ಣ ಹೋಟೆಲ್ ಮಾಲಕ, ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ನೆಜಾರು ವಾದಿರಾಜರಾವ್, ಎಸ್.ಕೆ. ಗೋಲ್ಡ್ ಸ್ಮಿತ್ಸ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉಪೇಂದ್ರ ಆಚಾರ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ, ದಯಾನಂದ ಆಚಾರ್ಯ, ಸಂಧ್ಯಾ ಲಕ್ಷ್ಮಣ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಗೌರವಾಧ್ಯಕ್ಷ ದಾಮೋದರ ಆಚಾರ್ಯ, ಉಪಾಧ್ಯಕ್ಷರಾದ ಸತೀಶ್ ಆಚಾರ್ಯ ಮತ್ತು ಮಹೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಎಸ್. ಆಚಾರ್ಯ, ಕೋಶಾಧಿಕಾರಿ ಅಶೋಕ್ ಆಚಾರ್ಯ ಹಾಗೂ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಉಪಾಧ್ಯಕ್ಷ ಜನಾರ್ದನ ಎಸ್ಆಚಾರ್ಯ ಸ್ವಾಗತಿಸಿದರು. ಪುರೋಹಿತ ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಘಟಕದ ಯಶೋಧಾ ಗಂಗಾಧರ ಆಚಾರ್ಯ ವಂದಿಸಿದರು



