ಉಡುಪಿಮಿತ್ರ ಪತ್ರಿಕೆ ಸುದ್ಧಿ :
ವರದಿ : ಚಿತ್ತೂರು ಪ್ರಭಾಕರ ಆಚಾರ್ಯ
ಕುಂದಾಪುರ, ಸೆ.೦06: ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದಲ್ಲಿನ ಪಾಠವೊಂದೇ ಶಿಕ್ಷಣವಲ್ಲ. ಭವಿಷ್ಯದ ಕೊಂಡಿಗಳಾದ ವಿದ್ಯಾರ್ಥಿಗಳನ್ನು ಕೇವಲ ಪಠ್ಯಪುಸ್ತಕಕ್ಕೆ ಸೀಮಿತಗೊಳಿಸುವುದು ಸರಿಯಲ್ಲ. ಸುಜ್ಞಾನ ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಯ ಸರ್ವಾಂಗೀಣ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಉದ್ದೇಶದಲ್ಲಿ ಶಿಕ್ಷಣದ ಜೊತೆಯಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಮಾಹಿತಿ ನೀಡಲಾಗುತ್ತಿದೆ ಎಂದು ಸುಜ್ಞಾನ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ನುಡಿದರು. ಅವರು ಸುಜ್ಞಾನ ಎಜುಕೇಶನ್ ಟ್ರಸ್ಟ್ (ರಿ.) ವತಿಯಿಂದ ಯಡಾಡಿ ಮತ್ಯಾಡಿ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ನಡೆದ ಮುದ್ದುಕಷ್ಣ ಸ್ಪರ್ಧೆ-೨೦೨೬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕೆಂಬ ಉದ್ದೇಶದಲ್ಲಿ ನಮ್ಮ ವಿದ್ಯಾ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ, ಮುದ್ಧುಕೃಷ್ಣ ಸ್ಪರ್ಧೆ ಸಹಿತ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ ಎಂದರು.
ನಟಿ, ಚಲನಚಿತ್ರ ನಿರ್ದೇಶಕಿ ಸಂಯುಕ್ತ ಹೊರನಾಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಪೋಷಕರು ಮಕ್ಕಳಿಗೆ ನಮ್ಮ ಸಂಸ್ಕೃತಿಗಳನ್ನ ಪರಿಚಯಿಸಬೇಕು. ಚಲನ ಚಿತ್ರ ಹಾಗೂ ಮೊಬೈಲ್ ವೀಕ್ಷಣೆಗೆ ಮಿತಿ ಹೇರಬೇಕು. ಸಂಗೀತ, ನೃತ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು ಎಂದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ ಮಾತನಾಡಿ ಪ್ರತೀ ವರ್ಷ ೧೦೦ಕ್ಕೂ ಹೆಚ್ಚು ಮಕ್ಕಳು ಮುದ್ಧು ಕೃಷ್ಣ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಮಕ್ಕಳಲ್ಲಿ ತಂದೆ ತಾಯಿ ಕೃಷ್ಣನ ರೂಪವನ್ನು ನೋಡುತ್ತಾ ಸಂತೋಷ ಪಡುತ್ತಾರೆ ಎಂದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ ಸುಜ್ಞಾನ ಸಂಸ್ಥೆ ಕೇವಲ ಪಠ್ಯಪುಸ್ತಕದಲ್ಲಿರುವ ವಿಷಯಗಳನ್ನು ಮಾತ್ರ ತಿಳಿಸುತ್ತಾ ಬಂದಿಲ್ಲ. ಇಲ್ಲಿ ಮಾನವೀಯ ಮೌಲ್ಯಗಳು, ಆಚಾರ ವಿಚಾರಗಳನ್ನು ತಿಳಿಸಿಕೊಡುತ್ತಾ ಬಂದಿದ್ದೇವೆ. ಧರ್ಮ, ಸಂಸ್ಕೃತಿ, ಆಚಾರ, ವಿಚಾರವನ್ನು ಪರಿಚಯಿಸುವ ಉದ್ದೇಶದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯನ್ನು ನಡೆಸುತ್ತಾ ಬಂದಿದ್ದೇವೆ ಎಂದರು.

ವೇದಿಕೆಯಲ್ಲಿ ವಿದ್ವಾನ್ ಕೆ.ಭವಾನಿ ಶಂಕರ್, ಯಕ್ಷಗಾನ ಕಲಾವಿದೆ ಶ್ರೀಮತಿ ಅಶ್ವಿನಿ ಕೊಂಡದಕುಳಿ, ವಿದುಶಿ ವಿದ್ಯಾ ಸಂದೇಶ್, ಸಂಗೀತ ಶಿಕ್ಷಕಿ ಮೀನಾ ಕಾರಂತ್ ಸಾಸ್ತಾನ, ಸುಜ್ಞಾನ ವಿದ್ಯಾ ಸಂಸ್ಥೆಯ ರಂಜನ್ ಶೆಟ್ಟಿ,ಹಾಗೂ ಶ್ರೀಮತಿ ಸ್ಫೂರ್ತಿ ವೇದಿಕೆಯಲ್ಲಿದ್ದರು.

ಸುಜ್ಞಾನ ನ್ಯಾಶನಲ್ ಕಾಲೇಜು ಬಾರಕೂರು ಇಲ್ಲಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಸ್ವಾಗತಿಸಿದರು. ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸಂಸ್ಥೆಯ ಮುಖ್ಯೋಪಾದ್ಯಾಯ ಪ್ರದೀಪ್ ಶೆಟ್ಟಿ ವಂದಿಸಿದರು.
ಸಂಸ್ಥೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಪ್ರೀತಿ ಕಾರ್ಯಕ್ರಮ ನಿರೂಪಿಸಿದರು.




